Sunday 5 February, 2012

ಪ್ರೊ. ಕೆ.ಎಸ್. ನಿಸಾರ್ ಅಹಮದ್ ೫-೨-೧೯೩೬

ನಿತ್ಯೋತ್ಸವದ ಕವಿ ನಿಸಾರ್ ಅಹಮದ್‌ರವರು ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ದೇವನ ಹಳ್ಳಿಯಲ್ಲಿ. ತಂದೆ ಷೇಕ್ ಹೈದರ್, ತಾಯಿ ಹಮೀದಾ ಬೇಗಂ. ತಂದೆ ಸರಕಾರಿ ನೌಕರಿಯಲ್ಲಿದ್ದು ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರು. ನಿಸಾರರು ಪ್ರಾಥಮಿಕ, ಮಾಧ್ಯಮಿಕ ಶಾಲೆ ಓದಿದ್ದು ದೇವನಹಳ್ಳಿ. ಪ್ರೌಢಶಾಲೆಗೆ ಹೊಸಕೋಟೆ ಹೈಸ್ಕೂಲು. ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜು ಸೇರಿ ಭೂಗರ್ಭ ಶಾಸ್ತ್ರದಲ್ಲಿ ಆನರ್ಸ್‌ ಪದವಿ. ಎಲ್. ಗುಂಡಪ್ಪ, ಎಂ.ವಿ. ಸೀತಾರಾಮಯ್ಯ, ರಾಜರತ್ನಂ, ವಿ.ಸೀ. ಇವರ ಗುರುಗಳು. ಕನ್ನಡದಲ್ಲಿ ಆಸಕ್ತಿ ಬೆಳೆಯಲು ಇವರೆಲ್ಲರೂ ಕಾರಣರು.

೧೯೫೭-೫೮ರಲ್ಲಿ ಭೂವಿಜ್ಞಾನಿಯಾಗಿ ಆಯ್ಕೆಯಾಗಿ ಉದ್ಯೋಗ ಆರಂಭಿಸಿದ್ದು ಗುಲಬರ್ಗಾದಲ್ಲಿ . ಕೆಲಸದಲ್ಲಿ ತೃಪ್ತಿ ದೊರೆಯದೆ ಎಂ.ಎಸ್‌ಸಿ. ಮುಗಿಸಿ ಬೆಂಗಳೂರು ಸರಕಾರಿ ಕಾಲೇಜಿನಲ್ಲಿ ಅಧ್ಯಾಪಕ ವೃತ್ತಿ ಆರಂಭ. ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು ಪುನಃ ಶಿವಮೊಗ್ಗ ಕಾಲೇಜಿನಲ್ಲಿದ್ದಾಗ ನಿವೃತ್ತಿ.

ಸೇವೆಯಲ್ಲಿದ್ದಾಗಲೇ ರಾಜ್ಯಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಪ್ರಕಟಿಸಿದ ‘ಚಂದನ’ ತ್ರೈಮಾಸಿಕ, ಸಾಹಿತ್ಯದ ಎಲ್ಲ ಪ್ರಕಾರಗಳ ದಶವಾರ್ಷಿಕ ಸಂಚಿಕೆ ಪ್ರಕಟಣೆ. ದೆಹಲಿಯಲ್ಲಿ CONTEMPORARY INDIAN LITERATURE ಸೆಮಿನಾರ್ ವ್ಯವಸ್ಥೆ ಮಾಡಿದ ಹೆಗ್ಗಳಿಕೆ. ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ಮಂಡಲಿಯ ಸದಸ್ಯರು. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಭಾವಗೀತೆಯ ಕ್ಯಾಸೆಟ್ ತಂದ ಕೀರ್ತಿ. ನಿತ್ಯೋತ್ಸವ, ಸುಶ್ರಾವ್ಯ, ನವೋಲ್ಲಾಸ, ಸುಮಧುರ. ಅಪೂರ್ವ, ಹೊಂಬೆಳಕು ಕ್ಯಾಸೆಟ್ಟುಗಳ ಬಿಡುಗಡೆ.

ಮನಸು ಗಾಂಬಜಾರು, ನೆನೆದವರ ಮನದಲ್ಲಿ, ಸುಮುಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ನಿತ್ಯೋತ್ಸವ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು-ಕವನ ಸಂಕಲನಗಳು. ಎ ಮಿಡ್ ಸಮರ್ ನೈಟ್ಸ್ ಡ್ರೀಮ್, ಒಥೆಲೋ-ಕನ್ನಡಕ್ಕೆ ಅನುವಾದ. ನವಕರ್ನಾಟಕ ವಿಶ್ವಕಥಾಕೋಶಕ್ಕೆ ‘ಹೆಜ್ಜೆ ಗುರುತುಗಳು’ ಕಥಾಸಂಕಲನ ಅನುವಾದ. ಇದು ಬರಿ ಬೆಡಗಲ್ಲೊ ಅಣ್ಣ, ಮನದೊಂದಿಗೆ ಮಾತುಕಥೆ, ಅಚ್ಚುಮೆಚ್ಚು -ಗದ್ಯಬರಹಗಳು. ಹಲವಾರು ಮಕ್ಕಳ ಕೃತಿಗಳೂ ಪ್ರಕಟ.

ಸೋವಿಯತ್ ಲ್ಯಾಂಡ್ ನೆಹರೂ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡಮಿ ಫೆಲೋಶಿಪ್ ದೇಜಗೌ ಪ್ರತಿಷ್ಠಾನದ ವಿಶ್ವಮಾನವ ಪ್ರಶಸ್ತಿ, ಬಿ.ಎಂ.ಶ್ರೀ. ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಕನಾಟಕ ವಿಶ್ವವಿದ್ಯಾಲಯದ ಡಾಕ್ಟರೇಟ್, ಭಾರತ ಸರಕಾರದ ಪದ್ಮಶ್ರೀ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.

No comments:

Post a Comment